ಪುತ್ತೂರು: ಯುವಜನತೆಯು ರಾಷ್ಟ್ರೀಯ ಭಾವೈಕ್ಯತೆಯನ್ನು ಸಾಕಾರಗೊಳಿಸುವ ಮೂಲಕ ದೇಶಕಟ್ಟುವ ಕೈಂಕರ್ಯದಲ್ಲಿ ತಮ್ಮನ್ನು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್ ರೈ ಹೇಳಿದರು.
ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಸಪ್ಟೆಂಬರ್24 ರಂದು ಆಯೋಜಿಸಲಾದ 51 ನೇ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಆನ್ ಲೈನ್ ವೇದಿಕೆಯಲ್ಲಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಎನ್ನೆಸ್ಸೆಸ್ ಸ್ವಯಂಸೇವಕರು ನಿಸ್ವಾರ್ಥತೆ, ರಾಷ್ಟ್ರೀಯತೆ, ಪರೋಪಕಾರ, ಸಹಿಷ್ಣುತೆ ಮೊದಲಾದ ಗುಣಾತ್ಮಕ ಅಂಶಗಳನ್ನು ಮೈಗೂಡಿಸಿಕೊಳ್ಳಬೇಕು. ಯುವಜನಾಂಗವು ತನ್ನಲ್ಲಿ ಅಡರುವ ಎಲ್ಲಾ ರೀತಿಯ ಶಕ್ತಿ ಸಾಮಥ್ರ್ಯವವನ್ನು ಧನಾತ್ಮಕವಾಗಿ ಬಳಸಿಕೊಳ್ಳುವಲ್ಲಿ ಸತತ ಪ್ರಯತ್ನಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಮಾತನಾಡಿ, "ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಲ್ಲಿ ಅಡಗಿರುವ ಕಾರ್ಯನಿಷ್ಠೆ ಮತ್ತು ಬದ್ಧತೆ ನಿಜಕ್ಕೂ ಶ್ಲಾಘನೀಯ ಮತ್ತು ಇತರ ಯುವ ಸಮುದಾಯಕ್ಕೆ ಮಾದರಿ" ಎಂದರು.
ಕಾಲೇಜಿನ ಎನ್ನೆಸ್ಸೆಸ್ ಘಟಕದ ಎಲ್ಲಾ ಸ್ವಯಂಸೇವಕರು ಈ ಆನ್ ಲೈನ್ ಕಾರ್ಯಾಗಾರದಲ್ಲಿ ಭಾಗವಹಿಸಿದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ದಿನಕರ್ ಅಂಚನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಾಧಿಕಾರಿ ಶಶಿಪ್ರಭಾ ಬಿ ವಂದಿಸಿದರು.