ಮಂಗಳೂರು: ಮಾದಕ ದ್ರವ್ಯ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಜಾಗೃತಿ ಮೂಡಿಸಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸೂಚಿಸಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾದಕ ದ್ರವ್ಯ ಸಮನ್ವಯ (NCORD) ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ದುರುಪಯೋಗವನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರಕಾರದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಈ ಸಮಿತಿ ರಚಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಹಂತದಲ್ಲಿ ನಡೆಯುವ ತಪಾಸಣೆ ಮತ್ತು ಪರಿಶೀಲನೆಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಿ, ವರದಿ ಸಲ್ಲಿಸಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಮಾದಕ ದ್ರವ್ಯಗಳ ಅಪಾಯ ಮತ್ತು ದಂಡನೆಗಳ ಕುರಿತು ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ಸಹಕಾರ ಪಡೆದು ಅರಿವು ಮೂಡಿಸಬೇಕು. ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸಿ ತಾಣಗಳಲ್ಲಿ ಮಾದಕ ಚಟುವಟಿಕೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಪದವಿ ಕಾಲೇಜುಗಳಲ್ಲಿ ಸ್ಥಾಪಿಸಲಾಗಿರುವ ಮಾದಕದ್ರವ್ಯ ವಿರೋಧಿ ಸಮಿತಿಗಳನ್ನು ಸಕ್ರಿಯಗೊಳಿಸಬೇಕು. ಸಂಶಯಾಸ್ಪದ ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು ಎಂದು ಅವರು ಕಾಲೇಜು ಶಿಕ್ಷಣ ಇಲಾಖೆಗೆ ತಿಳಿಸಿದರು. ಅಂಚೆ ಮತ್ತು ಕೆ.ಎಸ್.ಆರ್.ಟಿ.ಸಿ. ಪಾರ್ಸಲ್ಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಸಂಶಯಾಸ್ಪದ ಪಾರ್ಸಲ್ಗಳ ಬಗ್ಗೆ ಕೂಡಲೇ ಪೊಲೀಸರಿಗೆ ತಕ್ಷಣವೇ ಮಾಹಿತಿ ನೀಡಲು ಅವರು ತಿಳಿಸಿದರು. ಮಾದಕ ದ್ರವ್ಯ ಚಟುವಟಿಕೆಗಳು ನಡೆಯುವ ಸಂಶಯಾಸ್ಪದ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಅವರು ಮಾತನಾಡಿ, ಜಿಲ್ಲಾ ಮಟ್ಟದ ಸಮಿತಿಯಲ್ಲಿರುವ ಇಲಾಖೆಗಳು ತಮ್ಮ ವ್ಯಾಪ್ತಿಯ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅಗತ್ಯ ನೆರವು ನೀಡಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ ಮಿಥುನ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.