ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅಕ್ಕಪಡೆ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಇದು ಸಂಕಷ್ಟದಲ್ಲಿರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗುವುದರೊಂದಿಗೆ ರಕ್ಷಣೆ ನೀಡಿ, ಭಯಮುಕ್ತ ವಾತಾವರಣ ಕಲ್ಪಿಸಲಿದೆ ಎಂದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಕ್ಕ ಪಡೆ ಯೋಜನೆಯ ವಾಹನಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸಲಿದ್ದು, ಹೆಣ್ಣು ಮಕ್ಕಳನ್ನು ದೌರ್ಜನ್ಯಕ್ಕೊಳಗಾಗದಂತೆ ಅವರುಗಳಿಗೆ ಸುರಕ್ಷತಾ ಭಾವನೆ ಮೂಡಿಸಿ, ಸ್ವತಂತ್ರ್ಯವಾಗಿ ಬದುಕಲು ಧೈರ್ಯ ತುಂಬಿಸುವ ಕೆಲಸ ಅಕ್ಕಪಡೆ ಮಾಡಲಿದೆ. ಮಹಿಳೆಯರ ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸಲಿದೆ ಎಂದರು.

ತರಬೇತಿ ಹೊಂದಿದ ಅಕ್ಕಪಡೆಯ ಸದಸ್ಯರನ್ನು ಶಾಲಾ-ಕಾಲೇಜು, ಬಸ್ ನಿಲ್ದಾಣ, ದೇವಸ್ಥಾನ, ಹಾಸ್ಟಲ್‍ಗಳು, ಜನದಟ್ಟಣೆ ಪ್ರದೇಶ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಗಸ್ತು ತಿರುಗುವುದರೊಂದಿಗೆ ಯುವತಿಯರು ಹಾಗೂ ವಿದ್ಯಾರ್ಥಿಗಳನ್ನು ಚುಡಾಯಿಸುವ, ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ವಾಹನದಲ್ಲಿ 4 ಜನ ಗೃಹ ರಕ್ಷಕಿಯರು ಮತ್ತು ಪೊಲೀಸ್ ಇಲಾಖೆಯ ಒಬ್ಬರು ಡ್ರೈವರ್ ಅನ್ನು ನಿಯೋಜಿಸಲಾಗಿದ್ದು, ಎರಡು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು. 

ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, ಜಿಲ್ಲೆಯಲ್ಲಿ ಅಕ್ಕಪಡೆಗೆ ಚಾಲನೆ ನೀಡಲಾಗಿದ್ದು, ದೌರ್ಜನ್ಯ, ಹಿಂಸೆ, ನಿರ್ಲಕ್ಷ್ಯ ಹಾಗೂ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಹಾಗೂ ಮಕ್ಕಳಿಗೆ ಸಹಾಯಹಸ್ತ ಒದಗಿಸುವುದರೊಂದಿಗೆ ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗೆ ಒತ್ತು ನೀಡಲಿದ್ದಾರೆ ಎಂದರು.

ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತುರ್ತು ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸುವ, ಸ್ವರಕ್ಷಣೆ ಕಾರ್ಯವಿಧಾನ, ಸಂಚಾರ ನಿಯಮ ಕುರಿತು ಜಾಗೃತಿ ಮೂಡಿಸುವ ಬಗ್ಗೆ, ಫೋಕ್ಸೋ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಸೇರಿದಂತೆ ಮತ್ತಿತರ ಕುರಿತಾಗಿ ತರಬೇತಿ ನೀಡಲಾಗಿರುತ್ತದೆ ಎಂದ ಅವರು, ಪೊಲೀಸ್ ವಾಹನಗಳಲ್ಲಿರುವಂತೆ ಅಕ್ಕಪಡೆ ವಾಹನದಲ್ಲಿಯೂ ಸಹ ವೈರ್‍ಲೆಸ್ ಸೆಟ್‍ಗಳನ್ನು ಅಳವಡಿಸಲಾಗಿದ್ದು, ತುರ್ತು ಕರೆಗಳಿಗೆ ಆದ್ಯತೆಯ ಮೇಲೆ ಸ್ಪಂದಿಸಲಿದ್ದಾರೆ ಎಂದರು. 

ಹೊಸ ವರ್ಷದ ಅವಧಿಯಲ್ಲಿ ಪ್ರಾಯೋಗಿಕವಾಗಿ ಅಕ್ಕಪಡೆಯನ್ನು ಮಲ್ಪೆ ಮತ್ತು ಮಣಿಪಾಲದಲ್ಲಿ ನಿಯೋಜಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಅಪರಾಧಗಳ ಪ್ರಮಾಣ ಕಡಿಮೆ ಮಾಡಲು ಇದೊಂದು ಉತ್ತಮ ಯೋಜನೆಯಾಗಿದೆ ಎಂದ ಅವರು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆ ಹಾಗೂ ಮಧ್ಯಾಹ್ನ 2 ರಿಂದ ರಾತ್ರಿ 8 ಗಂಟೆಯ ವರೆಗೆ ಎರಡು ಪಾಳಿಗಳಲ್ಲಿ ಕಾರ್ಯನಿರ್ವಹಿಸಲಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098, ಮಹಿಳಾ ಸಹಾಯವಾಣಿ 181 ಹಾಗೂ ಪೊಲೀಸ್ ಸಹಾಯವಾಣಿ 112 ಸಂಖ್ಯೆಗೆ ಕರೆ ಮಾಡುವುದರ ಮೂಲಕ ಸಂಕಷ್ಟದಲ್ಲಿರುವ ಮಹಿಳೆಯರು ಹಾಗೂ ಮಕ್ಕಳು ಅಕ್ಕಪಡೆ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು. 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪ್ರಭಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅನುರಾಧ ಹಾದಿಮನಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು, ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.