ಉಡುಪಿ:  ಜಿಲ್ಲೆಯಲ್ಲಿ ಪ್ರಸ್ತುತ ಸಿ.ಡಿ ಅನುಪಾತವು 47.88 ರಷ್ಟು ಇದ್ದು, ಇದನ್ನು ಮತ್ತಷ್ಟು ಸುಧಾರಣೆ ತರುವುದರೊಂದಿಗೆ ಆರ್.ಬಿ.ಐ ನಿಯಮಾವಳಿ ಅನ್ವಯ ಶೇಕಡಾ 50 ರಷ್ಟು ಗುರಿ ಸಾಧಿಸಬೇಕು ಎಂದು ಕೆನರಾ ಬ್ಯಾಂಕ್ ರೀಜನಲ್ ಮ್ಯಾನೆಜರ್ ಮಹಾಮಾಯ ಪ್ರಸಾದ್ ರಾಯ್ ತಿಳಿಸಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕಳೆದ ಐದು ವರ್ಷಗಳಲ್ಲಿ 2018-19 ನೇ ಸಾಲಿನಲ್ಲಿ ಸಿ.ಡಿ.ಅನುಪಾತವು 50.32 ಹೆಚ್ಚಿತ್ತು. ನಂತರದ ವರ್ಷಗಳಲ್ಲಿ ಶೇ.50 ಕ್ಕಿಂತ ಕಡಿಮೆ ಇದೆ. ಕಳೆದ ವರ್ಷಕ್ಕೆ  ಹೋಲಿಸಿದ್ದಲ್ಲಿ ಬ್ಯಾಂಕಿಂಗ್ ಠೇವಣಿ ಅನುಪಾತವು ಶೇ.47.68 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.47.88 ರಷ್ಟಾಗಿ ಶೇ. 0.42 ರಷ್ಟು ಏರಿಕೆಯಾಗಿದೆ. ಎಲ್ಲಾ ಬ್ಯಾಂಕರ್ಸ್‍ಗಳು ಸಿ.ಡಿ ಅನುಪಾತವನ್ನು ಹೆಚ್ಚಿಸಲು ಕಾರ್ಯಪ್ರವೃತ್ತರಾಗಬೇಕು ಎಂದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಆದ್ಯತೆಯ ಮತ್ತು ಆದ್ಯತೆಯೇತರ ವಲಯಗಳೆರಡಕ್ಕೂ ಒಟ್ಟಾರೆಯಾಗಿ 15,514.08 ಕೋಟಿ ರೂ.ಗಳ ವಾರ್ಷಿಕ ಕ್ರೆಡಿಟ್ ಯೋಜನೆ ಗುರಿಯನ್ನು ನಿಗದಿಪಡಿಸಲಾಗಿದ್ದು, ಜೂನ್ ಅಂತ್ಯದವರೆಗೆ ಜಿಲ್ಲೆಯ ಬ್ಯಾಂಕುಗಳು 4,963.96 ಕೋಟಿ ರೂ.ಗಳ ಸಾಲ ವಿತರಿಸುವುದರೊಂದಿಗೆ ಶೇ. 32 ಗುರಿ ಸಾಧಿಸಿದೆ. ಮುಂದಿನ ದಿನಗಳಲ್ಲಿ ಗುರಿ ಸಾಧನೆ ಪ್ರಮಾಣ ಹೆಚ್ಚಾಗಬೇಕು ಎಂದರು.

ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಆರ್ಥಿಕ ನೆರವು ವಿತರಣೆಯ ಪ್ರಮಾಣವು ಹೆಚ್ಚಾಗಬೇಕು. ಈ  ಯೋಜನೆಯಡಿ ಈವರೆಗೆ 5597 ಅರ್ಜಿಗಳು ಸ್ವೀಕೃತವಾಗಿದ್ದು, 3532 ಫಲಾನುಭವಿಗಳಿಗೆ 34.61 ಕೋಟಿ ರೂ. ಸಾಲ ವಿತರಿಸಲಾಗಿದೆ. 1256 ಅರ್ಜಿಗಳು ತಿರಸ್ಕøತಗೊಂಡಿವೆ. ತೀರಸ್ಕೃತ ಅರ್ಜಿಗಳ ಸಂಖ್ಯೆ ಕಡಿಮೆಯಾಗಬೇಕು. ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮ ವಹಿಸಬೇಕು ಎಂದರು.

ರಾಜ್ಯ ಹಾಗೂ ಕೇಂದ್ರ ಪ್ರಾಯೋಜಿತ ಯೋಜನೆಗಳಡಿ ಆಯ್ಕೆಯಾಗಿ ಆರ್ಥಿಕ ನೆರವು ನೀಡಲು ಶಿಫಾರಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ಜನರಿಗೆ ಅನುಕೂಲವಾಗುವಂತೆ ಸರಳ ರೀತಿಯಲ್ಲಿ ನಿಯಮಾನುಸಾರ  ವಿಲೇವಾರಿ ಮಾಡಬೇಕು ಎಂದರು. 

ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ ಆರ್ಥಿಕ ವರ್ಷದಲ್ಲಿ 2024 ರ ಡಿಸೆಂಬರ್ ಅಂತ್ಯದವರೆಗೆ ಕೃಷಿ ವಲಯಕ್ಕೆ 4230 ನಿಗಧಿತ ಗುರಿಗೆ 1145 ಗುರಿ ಸಾಧಿಸಿ ಶೇ. 27.06, ಎಂ.ಎಸ್.ಎಂ.ಇ ವಲಯಕ್ಕೆ 3713 ಗುರಿ ನಿಗಧಿಪಡಿಸಲಾಗಿದ್ದು, 1569 ಗುರಿ ಸಾಧಿಸಿ ಶೇ. 42.26 ರಷ್ಟು, ಶಿಕ್ಷಣ ವಲಯಕ್ಕೆ 187 ನಿಗಧಿತ ಗುರಿಗೆ 33 ಸಾಧಿಸಿ ಮಾಡಿ ಶೇ. 17.42 ರಷ್ಟು, ವಸತಿ ಕ್ಷೇತ್ರಗಳಿಗೆ 510 ನಿಗಧಿತ ಗುರಿಗೆ 52 ಗುರಿ ಸಾಧಿಸಿ ಶೇ. 10.23 ರಷ್ಟು ಹಾಗೂ ಆದ್ಯತೇತರ ವಲಯಗಳಿಗೆ 6474 ನಿಗಧಿತ ಗುರಿಗೆ, 2014 ಗುರಿ ಸಾಧಿಸಿ ಶೇ. 31.11 ರಷ್ಟು ಸಾಧನೆ ಮಾಡಲಾಗಿದೆ ಎಂದರು.  

ಸಭೆಯಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ , ಆರ್.ಬಿ.ಐ ಲೀಡ್ ಡಿಸ್ಟ್ರಿಕ್ಟ್ ಆಫೀಸರ್ ಅಲೋಕ್ ಸಿನ್ಹಾ, ನಬಾರ್ಡ್‍ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕುಗಳ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.