ಉಡುಪಿ: ಬೈಂದೂರು ಉತ್ಸವ ಕಾರ್ಯಕ್ರಮದಲ್ಲಿ ಸರಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮಾಹಿತಿಯನ್ನು ಪ್ರದರ್ಶಿಸುವುದರೊಂದಿಗೆ, ಗ್ರಾಮೀಣ ಭಾಗದ ಜನರಿಗೂ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಯ ಲಾಭ ದೊರಕುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೈಂದೂರು ಉತ್ಸವ - ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಬೈಂದೂರು ಉತ್ಸವ ಕಾರ್ಯಕ್ರಮವು ಜನವರಿ 24 ರಿಂದ 26 ರ ವರೆಗೆ ಬೈಂದೂರಿನಲ್ಲಿ ನಡೆಯಲಿದೆ. ಉತ್ಸವದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಜನಪರ ಕಾರ್ಯಕ್ರಮಗಳ ಮಾಹಿತಿಯನ್ನು ಅಚ್ಚುಕಟ್ಟಾಗಿ ಪ್ರದರ್ಶಿಸಿ, ಜನಸಾಮಾನ್ಯರಿಗೆ ತಲುಪುವಂತೆ ಮಾಡುವುದು ಇಲಾಖೆಗಳ ಜವಾಬ್ದಾರಿಯಾಗಿದೆ ಎಂದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಠಿಸುತ್ತಿರುವ ಸಂಜೀವಿನಿ ಸಂಘದ ಸದಸ್ಯರುಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳಗಳು ಉತ್ಸವದಲ್ಲಿ ನಡೆಯಲಿದೆ ಎಂದರು.
ಇದೇ ಸಂದರ್ಭದಲ್ಲಿ ಕ್ಷೇತ್ರ ವ್ಯಾಪ್ತಿಯ ಪ್ರತೀ 43 ಗ್ರಾಮ ಪಂಚಾಯತ್ಗಳಲ್ಲಿ ಗ್ರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಸ್ಥಳೀಯ ಕ್ರೀಡಾಕೂಟ, ಜನಪದ-ಕಲೆ, ಆರೋಗ್ಯ ಮೇಳದ ಜೊತೆಗೆ ಇಲಾಖೆಗಳಲ್ಲಿ ಅನುಷ್ಠಾನಗೊಳಿಸಲಾಗಿರುವ ಸೌಲಭ್ಯಗಳ ಮಾಹಿತಿ ನೀಡಿದ್ದಲ್ಲಿ ಸರಕಾರದ ಯೋಜನೆಗಳನ್ನು ಗ್ರಾಮೀಣ ಭಾಗಗಳಲ್ಲಿಯೂ ಸಹ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಸಾಧ್ಯ. ಇಲಾಖೆಯ ಕಾರ್ಯಕ್ರಮಗಳನ್ನು ಕಾರ್ಯರೂಪಕ್ಕೆ ತರಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದರು.
ಉತ್ಸವದಲ್ಲಿ ವಸ್ತು ಪ್ರದರ್ಶನಕ್ಕೆ ಅನುಗುಣವಾಗಿ ಇಲಾಖೆಗಳಿಗೆ ಸ್ಥಳಾವಕಾಶ ಒದಗಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಇಲಾಖೆಗಳು ಭಾಗವಹಿಸಿ, ತಮ್ಮ ಇಲಾಖೆಗಳ ಯೋಜನೆಯನ್ನು ಆಕರ್ಷಕವಾಗಿ, ಜನಸಾಮಾನ್ಯರಿಗೆ ತಲುಪುವಂತೆ ಪ್ರದರ್ಶಿಸಬೇಕು ಎಂದ ಅವರು, ಗ್ರಾಮೋತ್ಸವ ನಡೆಯುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಸಹ ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕು ಎಂದರು.
ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾತನಾಡಿ, ಬೈಂದೂರು ಕ್ಷೇತ್ರದ ಪ್ರವಾಸೋದ್ಯಮ ಅವಕಾಶಗಳನ್ನು ಪರಿಚಯಿಸುವುದರೊಂದಿಗೆ, ಮತ್ತಷ್ಟು ಅಭಿವೃದ್ಧಿಪಡಿಸಲು, ಹೆಚ್ಚು ಹೆಚ್ಚು ಹೂಡಿಕೆದಾರರನ್ನು ಸೆಳೆಯುವಂತೆ ಮಾಡುವ ಉದ್ದೇಶದಿಂದ ಬೈಂದೂರು ಉತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕೇವಲ ಉತ್ಸವ ಆಗಿರದೇ ಮಾಹಿತಿ ಕಾರ್ಯಕ್ರಮವೂ ಆಗಿರಲಿದೆ ಎಂದ ಅವರು, ಕ್ಷೇತ್ರದ ವಿಶೇಷತೆ, ಗ್ರಾಮೀಣ ಸೊಗಡು, ಆಹಾರೋತ್ಪನ್ನಕ್ಕೆ ಪೂರಕವಾಗಿ ವಿವಿಧ ಮಳಿಗೆಗಳು, ಕಲಾ ಉತ್ಸವ, ಸಾಂಸ್ಕøತಿಕ ಕಾರ್ಯಕ್ರಮ ಹೀಗೆ ಎಲ್ಲವೂ ಉತ್ಸವದಲ್ಲಿ ಇರಲಿದೆ ಎಂದರು.
ಉತ್ಸವದಲ್ಲಿ ಬೈಂದೂರಿನ ಪ್ರೇಕ್ಷಣೀಯ ಸ್ಥಳಗಳು, ಸ್ಥಳೀಯ ಧಾರ್ಮಿಕ ಕ್ಷೇತ್ರಗಳ ವೀಡಿಯೋಗಳನ್ನು ಪ್ರದರ್ಶಿಸಬೇಕು. ಉತ್ಸವದ ದಿನಗಳಂದು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಂಗ್ರಹವಾಗುವ ಕಸಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದರು.
ಉದ್ಯೋಗ, ಆರೋಗ್ಯ, ಕೃಷಿ, ಆಹಾರ, ವಿಜ್ಞಾನ, ಕರಕುಶಲ, ಶಿಕ್ಷಣ ಮೇಳಗಳು, ಸಂಜೀವಿನಿ ಸಂಘದ ಗ್ರಾಮೀಣ ಸಂತೆ, ಕಂಬಳೋತ್ಸವ, ಕರಾವಳಿಯ ಖಾದ್ಯಗಳು, ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು ಈ ಉತ್ಸವದಲ್ಲಿ ಪಾಲ್ಗೊಳ್ಳಲಿವೆ ಎಂದರು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ವತಿಯಿಂದ ಆಯೋಜಿಸಲಾಗುವ ವಸ್ತು ಪ್ರದರ್ಶನಗಳ ಬಗ್ಗೆ ಮಾಹಿತಿ ಹಂಚಿಕೊಂಡರು
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಡಿ. ಎಫ್. ಓ ಗಣಪತಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.