ಉಡುಪಿ ಡಿ.16: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಯೋಜನೆಯ ಲಾಭವನ್ನು ಸಮಾಜದ ತಳಮಟ್ಟದ ಕಟ್ಟಕಡೆಯ ಅರ್ಹ ವ್ಯಕ್ತಿಗೂ ತಲುಪಿಸಬೇಕೆಂಬ ನಿಟ್ಟಿನಲ್ಲಿ ಉಡುಪಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ “ನಮ್ಮ ನಡೆ ವಾರ್ಡ್ ಕಡೆಗೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು.  

ಅವರು ಇಂದ್ರಾಳಿಯ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಡುಪಿ ತಾಲೂಕು ಇವರ ವತಿಯಿಂದ ಆಯೋಜಿಸಲಾದ “ನಮ್ಮ ನಡೆ ವಾರ್ಡ್ ಕಡೆಗೆ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 

ಸರಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪಿದಾಗ ಮಾತ್ರ ಯೋಜನೆಯ ಸಮರ್ಪಕ ಅನುಷ್ಠಾನ ಸಾಧ್ಯ. “ನಮ್ಮ ನಡಿಗೆ ವಾರ್ಡ್ ಕಡೆಗೆ” ಕಾರ್ಯಕ್ರಮದ ಮೂಲಕ ವಾರ್ಡ್ ಮಟ್ಟದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡಲಾಗುವುದು ಎಂದ ಅವರು, ತಳಮಟ್ಟದಲ್ಲಿ ಯೋಜನೆಯ ಲಾಭವನ್ನು ಪ್ರತಿಯೊಂದು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದರು.  

ವಾರ್ಡ್ ಮಟ್ಟದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆಗಳಿಗೆ ಭೇಟಿ ನೀಡಿಸಿ ಗ್ಯಾರಂಟಿ ಯೋಜನೆಗಳಿಂದ ವಂಚಿತರಾದ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಯೋಜನೆಗಳ ಅರಿವು ಮೂಡಿಸಿ ಅವರನ್ನು ಫಲಾನುಭವಿಗಳನ್ನಾಗಿ ಮಾಡಲಾಗುವುದು ಎಂದ ಅವರು, ಈಗಾಗಲೇ ಯೋಜನೆಯ ಫಲಾನುಭವಿಗಳಾಗಿರುವವರಲ್ಲಿ ಸೌಲಭ್ಯ ಪಡೆಯಲು ಎದುರಾಗುತ್ತಿರುವ ಸಮಸ್ಯೆಗಳ ಪಟ್ಟಿಮಾಡಿ, ಸಂಬಂಧಪಟ್ಟ ಅಧಿಕಾರಿಗಳ ಮೂಲಕ ನ್ಯೂನ್ಯತೆಗಳನ್ನು ಪರಿಹರಿಸಿ, ಪಂಚ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಒಬ್ಬ ಅರ್ಹ ಫಲಾನುಭವಿ ವಂಚಿತರಾಗದಂತೆ ನೋಡಿಕೊಳ್ಳುವುದೇ ಇದರ ಗುರಿಯಾಗಿದೆ ಎಂದರು.  

ಸಮಿತಿಯ ಸದಸ್ಯರಾದ ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದು ಎರಡೂವರೆ ವರ್ಷ ಕಳೆದಿದೆ. ಯೋಜನೆಗಳು ಜಾರಿಯಾದಾಗಿನಿಂದಲೂ ಈವರೆಗೆ ಸಮಾಜದ ದುರ್ಬಲರು, ಬಡವರು, ದಲಿತರ ಜೀವನದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ. ರಾಜ್ಯದ ಕಟ್ಟಕಡೆಯ ವ್ಯಕ್ತಿ ಹಸಿವಿನಿಂದ ಬಳಲಬಾರದು ಎಂಬ ನಿಟ್ಟಿನಲ್ಲಿ ಅನ್ನಭಾಗ್ಯ ಯೋಜನೆ, ಮನೆಯ ಯಜಮಾನಿಯ ಕೈಗೆ ಶಕ್ತಿ ತುಂಬಲು ಗೃಹಲಕ್ಷ್ಮೀ, ಮಹಿಳೆಯರು ಸ್ವಾವಲಂಭಿಯಾಗಿ ಬದುಕು ಕಟ್ಟಿಕೊಳ್ಳಲು ಶಕ್ತಿ ಯೋಜನೆ, ಆರ್ಥಿಕವಾಗಿ ದುರ್ಬಲರಾಗಿ ಕತ್ತಲಲ್ಲಿ ಜೀವನ ನಿರ್ವಹಿಸುತ್ತಿರುವವರ ಬದುಕಿಗೆ ಬೆಳಕಾಗಲು ಗೃಹಜ್ಯೋತಿ ಹಾಗೂ ಯುವಪೀಳಿಗೆಯನ್ನು ಸಶಕ್ತರಾಗಿಸಲು ಯುವನಿಧಿ ಯೋಜನೆಯನ್ನು ಜಾರಿಗೊಳಿಸಿದೆ ಎಂದ ಅವರು, ನಮ್ಮ ನಡಿಗೆ ವಾರ್ಡ್ ಕಡೆಗೆ ಕಾರ್ಯಕ್ರಮದ ಮೂಲಕ ಆಶಾ-ಅಂಗನವಾಡಿ ಕಾರ್ಯಕರ್ತೆಯರು ವಾರ್ಡಿನ ಪ್ರತಿಯೊಬ್ಬರ ಮನೆ ಭೇಟಿ ಮಾಡಿ, ಯೋಜನೆಯ ಲಾಭ ದೊರಕುವಂತೆ ಮಾಡಬೇಕು ಎಂದರು. 

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯಾ, ಅನುಷ್ಠಾನ ಸಮಿತಿಯ ಸದಸ್ಯರಾದ ಶಬರೀಷ್ ಸುವರ್ಣ, ಈಶ್ವರನಗರ ವಾರ್ಡಿನ ಪ್ರೇಮಲತಾ, ಅರ್ಚನಾ ದೇವಾಡಿಗ, ಸುಧಾಕರ್ ಪೂಜಾರಿ, ಪಂಚ ಗ್ಯಾರಂಟಿ ಯೋಜನೆಯ ಅಧಿಕಾರಿಗಳು, ಆಶಾ-ಅಂಗನವಾಡಿ ಕಾರ್ಯಕರ್ತರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.