ಉಡುಪಿ, ಜೂನ್ 20: ಜನಸಾಮಾನ್ಯರು ಸರಕಾರದ ಮೇಲೆ ನಿರೀಕ್ಷೆ ಇಟ್ಟುಕೊಂಡು ತಮ್ಮ ಕೆಲಸ ಕಾರ್ಯಗಳಿಗಾಗಿ ಕಚೇರಿಗಳಿಗೆ ಬರುತ್ತಾರೆ. ಅವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವುದರೊಂದಿಗೆ ನಿಯಮಾನುಸಾರ ಸಹಾನುಭೂತಿಯಿಂದ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ಸೂಚನೆ ನೀಡಿದರು.
ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಹಾಗೂ ಪೂರ್ವ ಮುಂಗಾರು ಮಳೆಯು ಯಥೇಚ್ಛವಾಗಿ ಬಂದಿದ್ದು, ಅಲ್ಪಪ್ರಮಾಣದ ಪ್ರವಾಹಗಳು ಉಂಟಾಗಿವೆ. ಮುಂಬರುವ ಮುಂಗಾರು ಮಳೆಯು ಹೆಚ್ಚಾಗಿ ಬರಬಹುದೆಂಬ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರವಾಹ ಸಂದರ್ಭದಲ್ಲಿ ಹೆಚ್ಚಿನ ಮಾನವ ಹಾಗೂ ಜಾನುವಾರುಗಳ ಪ್ರಾಣಹಾನಿ ಮತ್ತು ಆಸ್ತಿಗಳಿಗೆ ಹಾನಿಯಾಗದಂತೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೈಗೊಳ್ಳಬೇಕು ಎಂದರು.
ವಾರಾಹಿ ನೀರಾವರಿ ಕಾಮಗಾರಿಗಳನ್ನು ಕೈಗೊಳ್ಳಲು ಐದು ವರ್ಷಗಳ ಹಿಂದೆ ರೈತರ ಜಮೀನುಗಳನ್ನು ಭೂಸ್ವಾಧೀನ ಕೈಗೊಂಡಿದ್ದು, ಅವರ ಸ್ವತ್ತುಗಳನ್ನು ಸಹ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಅವರಿಗೆ ಭೂ ಪರಿಹಾರದ ಹಣವನ್ನು ನೀಡಿಲ್ಲ. ಇದರಿಂದಾಗಿ ರೈತರು ತಮ್ಮ ಜಮೀನಿನಲ್ಲಿ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಇದರಿಂದ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ. ಮುಂದಿನ ಸಭೆಯ ಒಳಗಾಗಿ ರೈತರಿಗೆ ಸೂಕ್ತ ಪರಿಹಾರವನ್ನು ಒದಗಿಸಬೇಕು ಎಂದ ಅವರು, ಈ ಕಾಮಗಾರಿಗೆ ಅಗತ್ಯವಿರುವ ಭೂಮಿಯು ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಇವೆ. ಇವುಗಳ ಕ್ಲಿಯರೆನ್ಸ್ ಅನ್ನು ಅರಣ್ಯ ಇಲಾಖೆಯವರು ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದೆ. ಕೃಷಿ ಚಟುವಟಿಕೆಗಳು ಈಗಾಗಲೇ ಗರಿಗೆದರಿವೆ. ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕವಾಗಿ ವಿತರಣೆಗೆ ಕ್ರಮಕೈಗೊಳ್ಳಬೇಕೆಂದ ಅವರು, ಕಳೆದ ಸಾಲಿನಲ್ಲಿ ಬಿತ್ತನೆ ನೆಲಗಡಲೆ ಬೀಜ ಕಳಪೆ ಇರುವುದನ್ನು ರೈತರಿಗೆ ವಿತರಿಸಿರುವ ಬಗ್ಗೆ ದೂರುಗಳು ಇವೆ. ಕಳಪೆ ಬೀಜವಾದಲ್ಲಿ ಸರಬರಾಜು ಮಾಡಿದ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕೆಂದರು.
ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸಮುದ್ರದ ಏರಿಳಿತದಿಂದಾಗಿ ಕಡಲಕೊರೆತ ಉಂಟಾಗುತ್ತಿದೆ. ಈಗಾಗಲೆ ಸರಕಾರ 5 ಕೋಟಿ ರೂ. ಹಣ ಬಿಡುಗಡೆಯಾಗಿದೆ. ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ತಪ್ಪಿದ್ದಲ್ಲಿ ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಹೆಜಮಾಡಿಯಿಂದ ಶಿರೂರಿನ ವರೆಗೆ ಕಡಲಕೊರೆತ ಸಂಭವವಿರುವ ಪ್ರದೇಶಗಳನ್ನು ಗುರುತಿಸಿ, ಶಾಶ್ವತ ಕಾಮಗಾರಿ ಕೈಗೊಳ್ಳಲು 60 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಿದ್ದು, ಇದನ್ನು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕೆಂದು ತಿಳಿಸಿದರು.
ಕರಾವಳಿ ಭಾಗದಲ್ಲಿನ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಸರಕಾರ ಅನೇಕ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಜಾರಿಗೆ ತಂದಿದೆ. ಈ ಬಗ್ಗೆ ಹೆಚ್ಚಿನ ಪ್ರಚಾರಗೊಳಿಸುವುದರೊಂದಿಗೆ ಫಲಾನುಭವಿಗಳನ್ನಾಗಿಸಬೇಕು. ಕರಾವಳಿ ಭಾಗದಲ್ಲಿಯೇ ಹೆಚ್ಚು ಮೀನುಗಾರಿಕೆ ಚಟುವಟಿಕೆಗಳು ನಡೆಯುತ್ತವೆ. ಸೌಲಭ್ಯಗಳು ಹೆಚ್ಚು ಹೆಚ್ಚು ಈ ಭಾಗದಲ್ಲಿ ನೀಡಬೇಕು. ಈ ಬಗ್ಗೆ ಸರಕಾರಕ್ಕೆ ಗಮನ ತರಲಾಗುವುದು ಎಂದರು.
ಮಲ್ಪೆ ಬಂದರಿನಲ್ಲಿ ಸ್ವಚ್ಛತಾ ನಿರ್ವಹಣೆ, ಭದ್ರತೆ ಸೇರಿದಂತೆ ಮತ್ತಿತರ ಸೂಕ್ತ ರೀತಿಯಲ್ಲಿ ಮಾಡಲು ಗುತ್ತಿಗೆ ನೀಡಲಾಗಿದ್ದು, ಅಲ್ಲಿ ಸಮರ್ಪಕವಾಗಿ ನಿರ್ವಹಣೆ ಆಗುತ್ತಿಲ್ಲ. ಈ ಬಗ್ಗೆ ಗಮನಹರಿಸಬೇಕು ಹಾಗೂ ಸಿಸಿಟಿವಿ ಗಳನ್ನು ಅಳವಡಿಸುವ ಕಾರ್ಯವನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ರೈತರ ತೋಟಗಳಿಗೆ ಭೇಟಿ ಮಾಡಿ, ಅವುಗಳು ಉತ್ತಮವಾಗಿ ನಿರ್ವಹಣೆ ಮಾಡುವ ಬಗ್ಗೆ ಸಲಹೆ, ಸೂಚನೆಗಳನ್ನು ನೀಡುವುದರ ಜೊತೆಗೆ ಸರ್ಕಾರದ ಯೋಜನೆಗಳು ಅವರಿಗೆ ತಲುಪಿಸುವುದರೊಂದಿಗೆ ಹೆಚ್ಚು ರೈತರು ಆದಾಯಗಳಿಸುವಂತೆ ಕಾರ್ಯಪ್ರವೃತ್ತರಾಗಬೇಕು. ಸಾಂಪ್ರದಾಯಿಕ ಅಡಿಕೆ, ತೆಂಗು, ಕಾಳುಮೆಣಸು ಬೆಳೆಗಳನ್ನು ಬೆಳೆಯಲಾಗುತ್ತದೆ. ಇವುಗಳ ಜೊತೆಯಲ್ಲಿ ಹಣ್ಣುಗಳು, ಜಾಯಿಕಾಯಿ, ಮ್ಯಾಂಗ್ಯೋ, ಹಲಸು, ಜಾಮ್ ಸೇರಿದಂತೆ ಮತ್ತಿತರ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕು. ಮುಂದಿನ ಕೆ.ಡಿ.ಪಿ ಸಮಯದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ನಿಖರವಾದ ಮಾಹಿತಿಗಳನ್ನು ನೀಡಬೇಕೆಂದು ತೋಟಗಾರಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪ್ರಾಕೃತಿಕ ಸೊಬಗು ಹಾಗೂ ಧಾರ್ಮಿಕ ಪ್ರವಾಸಿ ತಾಣಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಪ್ರವಾಸಿ ತಾಣಗಳಿಗೆ ಇನ್ನೂ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಕಾರ್ಯಗಳು ಆಗಬೇಕು. ಅವರುಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ಪ್ರವಾಸೋದ್ಯಮವನ್ನು ಇನ್ನಷ್ಟು ಹೆಚ್ಚಿಸಬೇಕು. ಸಾಧ್ಯವಾದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ಕೊಡಬೇಕು ಎಂದ ಅವರು, ಅನಧಿಕೃತ ಹೋಂಸ್ಟೇಗಳಿಗೆ ಕಡಿವಾಣ ಹಾಕಬೇಕು. ಪ್ರವಾಸಿ ಚಟುವಟಿಕೆ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ನೇಮಿಸಿಕೊಳ್ಳದಂತೆ ಕ್ರಮವಹಿಸಬೇಕು ಎಂದರು.
ಸಾರ್ವಜನಿಕರು ಗೃಹ ನಿರ್ಮಾಣ ಕೈಗೊಳ್ಳಲು ಅಗತ್ಯವಿರುವ ಮರಳು, ಕಲ್ಲು, ಕೆಂಪುಇಟ್ಟಿಗೆ ಸೂಕ್ತ ಬೆಲೆಗೆ ಸಿಗುವಂತೆ ಕ್ರಮವಹಿಸಬೇಕು ಎಂದ ಅವರು, ಅನಧಿಕೃತವಾಗಿ ಮರಳು ಗಣಿಗಾರಿಕೆ, ಸಾಗಾಣಿಕೆ, ಮಾರಾಟಕ್ಕೆ ಪೂರ್ಣಪ್ರಮಾಣದಲ್ಲಿ ಕಡಿವಾಣ ಹಾಕಬೇಕು. ಕೆಂಪುಕಲ್ಲಿ ಗಣಿಗಾರಿಕೆಗೆ ಗಣಿ ಇಲಾಖೆಯಿಂದ ಪರವಾನಿಗೆ ಲಭಿಸಿದ್ದರೂ ಅರಣ್ಯ ಇಲಾಖೆಯವರ ಹಸ್ತಕ್ಷೇಪದಿಂದ ಕೈಗೊಳ್ಳಲು ಆಗುತ್ತಿಲ್ಲ. ಇವು ನಿಯಮಾನುಸಾರ ಮಾಡಲು ಅನುಮತಿ ನೀಡಬೇಕೆಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಆಗುಂಬೆ ಘಾಟಿನಲ್ಲಿ ತೀವ್ರತರಹದ ತಿರುವುಗಳಿದ್ದು, ಅಪಘಾತಗಳಾಗುವ ಸಾಧ್ಯತೆಗಳು ಇವೆ. ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯವಿರುವ ಸೂಚನಾ ಫಲಕಗಳನ್ನು ನಿಗಧಿತ ಸ್ಥಳದಲ್ಲಿ ಅಳವಡಿಸಬೇಕು ಹಾಗೂ ರಸ್ತೆಯ ಪಕ್ಕದ ತಡೆಗೋಡೆ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳುವುದರ ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡಿ, ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿಸಲು ಪರಿಸರ ಇಲಾಖೆಯ ಅಧಿಕಾರಿಗಳು ಕೈಜೋಡಿಸಬೇಕು ಎಂದರು.
ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಬೇಕು. ನೂತನ ಜಿಲ್ಲಾ ಆಸ್ಪತ್ರೆಯ ಕಾಮಗಾರಿಯನ್ನು ವೇಗವನ್ನು ಹೆಚ್ಚಿಸಬೇಕು. ಕಾಮಗಾರಿಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಹೆಚ್ಚುವರಿ ಅನುದಾನವನ್ನು ಸರಕಾರದಿಂದ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದ ಅವರು, ಆರೋಗ್ಯ ಇಲಾಖೆ ವರ್ಗಾವಣೆಯಲ್ಲಿ ಪಾರದರ್ಶಕತೆ ಇರಬೇಕು. ತಾಯಿ ಮಕ್ಕಳ ಆಸ್ಪತ್ರೆ ನಿರ್ವಹಣೆ ಸುಧಾರಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿರುವ ನಾದುರಸ್ಥಾದಂತಹ ಸರಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಕಾಮಗಾರಿಗಳನ್ನುದ್ಯತೆ ಮೇಲೆ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ಒಂದು ಮಗುವು ಶಾಲೆಯಿಂದ ಹೊರಗುಳಿಯದ ಹಾಗೆ ನೋಡಿಕೊಳ್ಳಬೇಕು ಎಂದ ಅವರು, ಕೆಲವು ಖಾಸಗಿ ಶಾಲೆಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರತಿಶರ್ತ ನೂರರಷ್ಟು ಫಲಿತಾಂಶ ಬರಬೇಕೆಂಬ ಉದ್ದೇಶದಿಂದ ಒಂಭತ್ತನೇ ತರಗತಿ ವಿದ್ಯಾರ್ಥಿಗಳಿಗೆ ಅನುತ್ತೀರ್ಣ ಮಾಡುತ್ತಿರುವ ಬಗ್ಗೆ ಹಾಗೂ ಸರಕಾರಿ ಶಾಲೆಗೆ ಸೇರಲು ವರ್ಗಾವಣೆ ಪತ್ರ ನೀಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸುವಂತೆ ತಿಳಿಸಿದರು.
ಜಿಲ್ಲೆಯ ಕೆಲವು ಗ್ರಾಮೀಣ ಭಾಗಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ಗಳನ್ನು ಬಿಡಲಾಗಿತ್ತು. ಕಳೆದ ಎರಡು-ಮೂರು ವರ್ಷಗಳಿಂದ ಚಾಲನೆಯಲ್ಲಿ ಇಲ್ಲ. ಇದರಿಂದ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಉಟಾಗುತ್ತಿದೆ. ಇದನ್ನು ಪುನರ್ ಪ್ರಾರಂಭಿಸಬೇಕು. ಕೆಲವು ರೂಟ್ಗಳಿಗೆ ತಾತ್ಕಾಲಿಕ ರಹದಾರಿ ಪರವಾನಿಗೆಯನ್ನು ನೀಡಲಾಗಿತ್ತು. ಅವುಗಳನ್ನು ರದ್ದುಪಡಿಸಲಾಗಿದೆ. ಇವುಗಳನ್ನು ಮತ್ತೆ ನೀಡಬೇಕು. ಜಿಲ್ಲೆಗೆ ಶೀಘ್ರದಲ್ಲಿಯೇ ಹೊಸ ಬಸ್ಗಳು ಬರಲಿವೆ ಎಂದರು.
ಶಾಸಕ ಯಶ್ಪಾಲ್ ಎ ಸುವರ್ಣ ಮಾತನಾಡಿ, ರಾಜ್ಯದಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಚಟುವಟಿಕೆಗಳು ಹೆಚ್ಚು ನಡೆಯುತ್ತಿವೆ. ಆದರೆ, ವಸತಿ ಯೋಜನೆಯಲ್ಲಿ ಬರೀ 25 ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ. ಇತರ ಜಿಲ್ಲೆಗಳಿಗೂ 25 ಮನೆಗಳನ್ನು ನೀಡಲಾಗುತ್ತಿದೆ. ಇವುಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದರು.
ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಗ್ರಾಮ ಪಂಚಾಯತ್ನಲ್ಲಿ ವಿತರಿಸುತ್ತಿದ್ದ 9/11 ಅನ್ನು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಪ್ರತ್ಯಾಯೋಜಿಸಿದ ನಂತರ ಏಕ ವಿನ್ಯಾಸ ನಕ್ಷೆಯ ಸಮಸ್ಯೆಗಳ ಬಗ್ಗೆ ದೂರುಗಳು ಬರುತ್ತಿದ್ದು, ಇದರಿಂದಾಗಿ ಗೃಹ ನಿರ್ಮಾಣ ಮತ್ತು ಕಟ್ಟಡಗಳನ್ನು ಕಟ್ಟಲು ತೊಂದರೆಯಾಗುತ್ತಿದೆ. ಇದನ್ನು ಬಗೆಹರಿಸಬೇಕು ಎಂದು ಸಭೆಯ ಗಮನಕ್ಕೆ ತಂದರು.
ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾತನಾಡಿ, ಗ್ರಾಮೀಣ ಭಾಗದಲ್ಲಿ ರಸ್ತೆ ಬದಿಯಲ್ಲಿ ನೆಟ್ಟಿರುವ ಗಿಡಗಳು, ರಸ್ತೆಗೆ ಆವರಿಸಿದ್ದು, ಇದರಿಂದ ಸಾರ್ವಜನಿಕರು ಓಡಾಡಲು ಅನಾನುಕೂಲವಾಗಿದೆ ಹಾಗೂ ಕಾಡುಪ್ರಾಣಿಗಳ ಹಾವಳಿಗಳೂ ಸಹ ಆಗಿವೆ. ಕಳೆದ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದರೂ ಸಹ ಕ್ರಮವಾಗಿಲ್ಲ. ಎಂಬ ಮನವಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಒಂದು ವಾರದ ಒಳಗಾಗಿ ಇವುಗಳ ತೆರವು ಕಾರ್ಯಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.
ವಿಧಾನ ಪರಿಷತ್ ಶಾಸಕರುಗಳಾದ ಮಂಜುನಾಥ್ ಭಂಡಾರಿ ಮಾತನಾಡಿ, ಸರಕಾರ ಸಾರ್ವಜನಿಕರು ಅನುಕೂಲಕ್ಕಾಗಿ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಬಗ್ಗೆ ಹೆಚ್ಚು ಪ್ರಚಾರ ನೀಡುವುದರ ಜೊತೆಗೆ ಅರ್ಹ ಫಲಾನುಭವಿಗಳಿಗೂ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಅರಣ್ಯ ಇಲಾಖೆಯಿಂದ ಜನರಿಗೆ ಉಂಟಾಗಿರುವ ಸಮಸ್ಯೆಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದು ಸಭೆಯ ಗಮನಕ್ಕೆ ತಂದರು.
ಸಭೆಯಲ್ಲಿ ವಿಧಾನ ಪರಿಷತ್ ಶಾಸಕರ ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಶಾಸಕರುಗಳಾದ ವಿ. ಸುನೀಲ್ ಕುಮಾರ್ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ, ಡಿಎಫ್ಓ ಗಣಪತಿ, ವೈಲ್ಡ್ಲೈಫ್ ಡಿಎಫ್ಓ ಶಿವರಾಮ ಎಂ.ಬಾಬು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರು, ಕೆ.ಡಿ.ಪಿ ಸದಸ್ಯರುಗಳು, ಜಿಲ್ಲಾ ಮಟ್ಟದ ಅನುಷ್ಟಾನಾಧಿಕಾರಿಗಳು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.