ಮಂಗಳೂರು,ಮಾ.31:- ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧರು, ಜೈನರು ಸೇರಿದಂತೆ ಅಲ್ಪಸಂಖ್ಯಾತ ವರ್ಗದ ಕಲ್ಯಾಣಕ್ಕೆ ಸರ್ಕಾರದಿಂದ ಜಾರಿಗೊಳಿಸಿದ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವಂತೆ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಂಗಮೇಶ್ವರ ಅವರಿಗೆ ಸೂಚಿಸಿದರು.

ಅವರು ಮಾ.31ರ ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಸಾಧಿಸಲಾಗದ ಪ್ರಗತಿಯ ಪರಿಶೀಲನೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ,  ಆ ಯೋಜನೆಗಳ ಸಮರ್ಪಕ ಅನುಷ್ಠಾನ ಆಗಬೇಕು, ಅಂದರೆ ಯೋಜನೆಗಳ ಗುರಿ ಸಾಧಿಸುವುದು ಮಾತ್ರವಲ್ಲ, ಯೋಜನೆಗಳ ಫಲ ನೈಜ ಫಲಾನುಭವಿಗಳಿಗೆ ಸಲ್ಲಬೇಕು,  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ವಿವಿಧ ಯೋಜನೆಗಳು ಹಾಗೂ ಸವಲತ್ತುಗಳನ್ನು ಅರ್ಹರಿಗೆ ತಲುಪಿಸಬೇಕು ಎಂದರು.

ವಿದೇಶಗಳಲ್ಲಿ ವೃತ್ತಿ ನಿರ್ವಹಿಸುತ್ತಿರುವ ಭಾರತೀಯರಿಗೆ ಮತದಾರರ ಗುರುತಿನ ಚೀಟಿಗೆ ಫಾರಂ-6ಎ ಮುಖಾಂತರ ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದ್ದು ಇದರ ಪ್ರಯೋಜನ ಪಡೆಯುವಂತೆ ಜಾಗೃತಿ ಮೂಡಿಸಬೇಕು, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಫಲವನ್ನು ಅಲ್ಪಸಂಖ್ಯಾತರ ಫಲಾನುಭವಿಗಳು ಪಡೆಯಬೇಕು ಹಾಗೂ ಅದರ ಪ್ರಯೋಜನ ಪಡೆದಿರುವ ಗರ್ಭಿಣಿ ಮಹಿಳೆಯರನ್ನು ಸಂಪರ್ಕಿಸಿ ಮಾಹಿತಿ ಪಡೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿಯವರು, ಶಾಲೆಯಿಂದ ಹೊರಗುಳಿದ ಪ್ರತಿ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಅಲ್ಪಸಂಖ್ಯಾತರ ಇಲಾಖೆಯ ಯೋಜನೆಗಳ ಮಾಹಿತಿನೀಡಿ ಅಂತಹ ಮಕ್ಕಳ ಪೋಷಕರ ಮನವೊಲಿಸಿ ಅವರನ್ನು ಮರಳಿ ಶಾಲೆಗೆ ಕರೆತರುವಲ್ಲಿ ಕ್ರಮಕೈಗೊಳ್ಳುವಂತೆ ತಿಳಿಸಿದರು.

ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಸಂಖ್ಯಾತರ ಯುವಕರನ್ನು ನೋಂದಾಯಿಸಿಕೊಂಡು ಅವರಿಗೆ ವಿವಿಧ ಕೌಶಲ್ಯಗಳ ತರಬೇತಿ ನೀಡಬೇಕು, ಅದಕ್ಕಾಗಿ ಸಮುದಾಯದಲ್ಲಿ ಜಾಗೃತಿ ಮೂಡಿಸಿ ಯುವಕರನ್ನು ನೋಂದಾಯಿಸುವ ಕೆಲಸ ಮಾಡಬೇಕು, ವಿವಿಧ ರೀತಿಯ ಸ್ವಯಂ ಉದ್ಯೋಗಕ್ಕಾಗಿ ತರಬೇತಿ ನೀಡುವ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳು ಹಾಗೂ ತರಬೇತಿ ಕಾರ್ಯಕ್ರಮಗಳಿಗೆ ವ್ಯಾಪಕ ಪ್ರಚಾರವನ್ನು ನೀಡಬೇಕು ಎಂದು ಹೇಳಿದರು.

ಗಂಗಾ ಕಲ್ಯಾಣ ಯೋಜನೆಯಡಿ ಬೊರ್‍ವೆಲ್ ಕೊರೆಯುವ ಮುನ್ನ ಕೇಂದ್ರ ಅಂತರ್ಜಲ ಮಂಡಳಿಯಿಂದ ನಿರಪೇಕ್ಷಣಾ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ, ಸಂಬಂಧಿಸಿದವರು ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪಾಪ ಬೋವಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ವೀರಭದ್ರಪ್ಪ, ವಿಸ್ತರಣಾಧಿಕಾರಿ ಮಂಜುನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.